ಮಗೂ, ಶ್ವೇತಕೇತೂ….

Posted by ಅರುಂಧತಿ | Posted in | Posted on 2:08 AM

ಅಹಂಕಾರದಿಂದ ಬೀಗಿದ ಮಗ
ಅಪ್ಪನೆದುರು ನಿಂತ.
“ತಂದೆ, ನಾ ಎಲ್ಲ ಕಲಿತಿರುವೆ
ನಿನಗಿಂತ ನಾ ತಿಳಿದವನೀಗ”
ಎಂದ.
ಅಪ್ಪ ನಕ್ಕ,
“ಓಹೋ! ಯಾವುದನರಿತು
ಮತ್ತೇನೂ ಕಲಿಯಬೇಕಿಲ್ಲವೋ ಅದನ್ನೂ….
ಅದನ್ನೂ ಅರಿತುಬಿಟ್ಟೆಯಾ!?”
ಮಗ ತಬ್ಬಿಬ್ಬು.
ಅಪ್ಪ ಕೇಳುತ್ತಲೇ ಹೋದ,
ಯಾರು ನೀನು?
ನೀನು ಯಾರು?
ದೇಹ ನೀನಾದರೆ, ನಿನ್ನ ಶವ ನೀನಾ?
ಮನವು ನೀನಾದರೆ, ಬುದ್ಧಿ ಯಾರದು?
ಬುದ್ಧಿ ನೀನಾದರೆ, ಚೈತನ್ಯವದೆಲ್ಲಿ?
ತಿಳಿಯಲಿರುವುದದೆಷ್ಟು?
ಇದನರಿತರೆ ಉಳಿಯುವುದು ಇನ್ನೆಷ್ಟು!?
ಮಗೂ ಶ್ವೇತಕೇತು,
ನಿನ್ನನರಿ.
ನಿನ್ನನರಿ, ನಿನ್ನನರಿ.
ಅದಕ್ಕಾಗಿ ‘ನಿನ್ನ’ ಮರಿ!

ಹೀಗೊಂದು ಹಸಿವಿನ ಕಥೆ…

Posted by ಅರುಂಧತಿ | Posted in | Posted on 2:05 AM

ಮನೆ ಹೊರಗೆ ಇಣುಕಿದರೆ ಕಾಣೋದು ಭಣ ಭಣ ನೆಲ.
ಒಳಗೂ ಸುಡು ಹಬೆ. ಮಳೆ ಹನಿ ಕಂಡು ನಾಲ್ಕು ವರ್ಷವಾದರೂ ದಾಟಿತ್ತು. ಊರಿನ ಎಲ್ಲರೂ ಈಗ ಚಾತಕ ಪಕ್ಷಿಗಳು.
ಮೊದಲು ಮನೆಯೊಡೆಯ ಮನೆ ಬಿಟ್ಟು ಹೊರಟ. ಪಟ್ಟಣದಲ್ಲಿ ದುಡಿದರೆ ನಾಲ್ಕು ಕಾಸು ಸಂಪಾದಿಸಿ ಮನೆಗೂ ಕಳಿಸಬಹುದು ಅಂತ!
ಆರೇ ತಿಂಗಳು. ಪಟ್ಟಣದ ಅಬ್ಬರದಿಂದ ಕಂಗೆಟ್ಟ. ವಾಪಸು ಬಂದರೆ ಕಿತ್ತು ತಿನ್ನುವ ಮನೆ.
ರೈಲು ಕಂಬಿಯ ಮೇಲೆ ಅಂಗಾತ ಬಿದ್ದ. ಪೋಲೀಸರು ಮಹಜರು ಮಾಡುವ ಗೋಜಿಗೂ ಹೋಗಲಿಲ್ಲ.

* * *

ಗಂಡನ ಶ್ರಮದ ಫಲಕ್ಕೆ ಕಾಯುತ್ತ ಕುಳಿತವಳು ಕಾಯುತ್ತಲೇ ಉಳಿದಳು. ಪುಟ್ಟವೆರಡು ಮಕ್ಕಳು ಕಣ್ಣೀರಿಟ್ಟವು. ಸ್ವಲ್ಪ ಹೆಚ್ಚು ಬರುವಂತಿದ್ದಿದ್ದರೆ ಅದನ್ನೇ ಕುಡಿಯಬಹುದಿತ್ತೋ ಏನೋ?
ಅವಳಿಗೆ ತಡೆಯಲಾಗಲಿಲ್ಲ. ಬಚ್ಚಲ ಬದಿಯಲ್ಲಿ ಬಿದ್ದಿದ್ದ ಮಡಕೆ ತಂದಳು. ಅಟ್ಟದ ಮೇಲೆ ಅದನ್ನು ಕಟ್ಟಿದಳು. ಇಬ್ಬರಿಗೂ ಅದನ್ನು ತೋರಿಸಿ, “ಗಂಜಿ ತುಂಬಿಸಿಟ್ಟಿದ್ದೇನೆ, ಹೊರಗೆ ಹೋಗಿ ಬಂದು ಕೊಡುತ್ತೇನೆ ” ಅಂದಳು.
ಪಾಪ ಮಕ್ಕಳಿಗೂ ಆಸೆಯ ಕಣ್ಣು. ಹೊರಗೆ ಹೋದ ಅಮ್ಮ ಬರುವವರೆಗೆ ಅದನ್ನೇ ನೋಡುತ್ತ ಕುಳಿತರು. ದೊಡ್ಡವಳು ಬುದ್ಧಿವಂತೆ. ತಮ್ಮನಿಗೆ ಗಂಜಿಯ ಕಥೆ ಹೇಳಿದಳು. ಅಕ್ಕಿ, ನೀರು ಎಲ್ಲ ಒಂದೊಂದಾಗಿ ವರ್ಣಿಸಿದಳು. ತಮ್ಮನೂ ಕಣ್ಣಗಲಿಸಿ ಕೇಳುತ್ತಿದ್ದ. ನೀರು ಅಂದಾಗ, ಅಕ್ಕಿ ಅಂದಾಗ ಅವನ ಒಣಗಿದ ನಾಲಗೆಯೂ ಚಿಗುರುತ್ತಿತ್ತು.

* * *

ಸಂಜೆಯಾಯ್ತು.
ದಿನವಿಡೀ ರಸ್ತೆ ಸವೆಸಿ ದೀನಳಾದ ಅಮ್ಮ ಜಗಲಿಯಲ್ಲಿ ಅಂಗಾತ ಬಿದ್ದಳು.
“ಅಮ್ಮಾ!!” ಚಿಕ್ಕವ ಓಡಿಬಂದ. ದೊಡ್ಡವಳು ಅಮ್ಮನನ್ನು ತಬ್ಬಿಕೊಂಡಳು. ಬೆಕ್ಕೊಂದು ಎತ್ತಲಿಂದಲೋ ಹಾರಿ ಬಂದು ಮಡಿಕೆ ಉರುಳಿಸಿತು. ಒಡೆದ ಮಡಿಕೆ ಮಕ್ಕಳ ಎದೆಯನ್ನೂ ಒಡೆಯಿತು.
ಮಡಕೆ ಚೂರು ನೋಡನೋಡುತ್ತಲೇ ಮಕ್ಕಳಿಬ್ಬರೂ ಖಾಲಿಯಾದರು. ಜೀವವೇ ಇಲ್ಲದ ದೇಹ ಖಾಲಿಯಲ್ಲವೇನು?

ಜಗಲಿಯಲ್ಲಿ ಮೂರು ಹೆಣಗಳು,
ಅನಾಥವಾಗಿಯೇ ಉಳಿದವು.
* * *

ಪ್ರಾಣಕ್ಕಿಂತ ಮಾನ ದೊಡ್ಡದೆಂದ ಅವರು ಏನು ಮಾಡಿದರು ಗೊತ್ತಾ?

Posted by ಅರುಂಧತಿ | Posted in | Posted on 2:03 AM

ಅಲ್ಲಾವುದ್ದಿನ್ ಖಿಲ್ಜಿ ಮೇವಾಡದ ಗಡಿಗೆ ಸೈನ್ಯ ಸಮೇತ ಬಂದುಬಿಟ್ಟ. ತಾನು ಬರುವ ಸುದ್ದಿ ರಜಪೂತ ದೊರೆ ಭೀಮ ದೇವ ಸಿಂಹನಿಗೆ ತಿಳಿಯದಿರಲೆಂದು ಸಾಕಷ್ಟು ಪಾಡುಪಟ್ಟ. ಸಾಧ್ಯವಾಗಲಿಲ್ಲ. ರಾಜನಿಗೆ ಗೂಡಚಾರರು ಸುದ್ದಿ ಮುಟ್ಟಿಸಿದರು. ಭೀಮದೇವ ಸರ್ವ ಸನ್ನದ್ಧನಾದ. ಅಲ್ಲಾವುದ್ದಿನ್ ಹೆಜ್ಜೆ ಇಡುವ ಮುನ್ನವೇ ಮುಗಿಬೀಳಲು ಯೋಜನೆ ಹಾಕಿದ.
ಯುದ್ಧವೆಂದರೇನೇ ಕಳೆಗಟ್ಟುವ ಕುಲ ರಜಪೂತರದು. ಕದನವೇ ಇಲ್ಲದೆ ಒರೆಯೊಳಗಿಟ್ಟಿದ್ದ ಕತ್ತಿಯನ್ನು ಹೊರಗೆಳದರು ಸೈನಿಕರು. ರಣೋತ್ಸಾಹ ಮೈಮೇಲೇರಿತು.

ಇತ್ತ ಖಿಲ್ಜಿ ಹಗಲಿರುಳು ಪದ್ಮಿನಿ… ಪದ್ಮಿನಿ ಎನ್ನುತ್ತ ಮೈಮರೆತಿದ್ದ. ಭುವನದೊಳಗಿನ ಅಪ್ರತಿಮ ಸುಂದರಿ ಪದ್ಮಿನಿಯನ್ನು ಭೋಗಿಸಬೇಕೆನ್ನುವ ಬಯಕೆ ಅವನನ್ನು ಮೇವಾಡದ ಗಡಿಗೆ ಕರೆತಂದಿತ್ತು. ಗುರ್ಜರದ ರಾಣಿ ಕಮಲಾ ದೇವಿಯನ್ನು ಅಪಹರಿಸಿ ಅವಳ ಸೌಂದರ್ಯ ಸೂರೆಗೊಂಡಿದ್ದ ಅವನಿಗೆ ಪದ್ಮಿನಿ ಇಲ್ಲದ ತನ್ನ ಜನಾನಾ ಮೌಲ್ವಿಯಿಲ್ಲದ ಮಸೀದಿ ಎನಿಸುತ್ತಿತ್ತಂತೆ! ಈಗ ಅವನು ಅಲ್ಲಿಗೆ ಬಂದಿದ್ದು ಅದೇ ಕಾರನಕ್ಕೆ. ಮೋಸದಿಂದ ಪದ್ಮಿನಿಯನ್ನು ತನ್ನ ಜನಾನಾಗೆ ಒಯ್ಯುವುದಕ್ಕೆ!

ರಜಪೂತರೇನೂ ಬಾಯಿಗೆ ಬೆಟ್ಟು ಹಾಕಿ ಕುಳಿತಿರಲಿಲ್ಲ. ಈ ಬಾರಿ ಅಲ್ಲಾದ್ದೀನನ ಎದೆ ಝಲ್ಲೆನ್ನುವಂತೆ ಹೋರಾಡಿದರು. ಕತ್ತಿಗೆ ಕತ್ತಿಯ ಉತ್ತರ ಕೊಟ್ಟರು. ಬೆಂಕಿಯ ಚೆಂಡಿಗೆ ಬೆಂಕಿಯೇ ಪ್ರತಿಕ್ರಿಯೆಯಾಯ್ತು. ರಜಪೂತರ ಕದನದ ಕಾವಿಗೆ ಖಿಲ್ಜಿಯ ಸೇನೆ ಭಸ್ಮವಾಯ್ತು. ಕಂಡು ಕೇಳರಿಯದ ಸೋಲು ಖಿಲ್ಜಿಗೆ! ಅವನನ್ನು ಬಂಧಿಸಿ ರಾಜನೆದುರು ನಿಲ್ಲಿಸಿದರೆ, ನಾಚಿಕೆ ಬಿಟ್ಟು ಗೋಗರೆದ; “ಪ್ರಭೂ, ದೇವರ ದೇವ… ನನ್ನ ಬಿಟ್ಟುಬಿಡು ತಂದೆ. ತಪ್ಪಿ ನಿನ್ನೆದುರು ಕಾಳಾಗಕ್ಕೆ ನಿಂದೆ” ಎಂದ!
ಶರಣಾಗತರನ್ನು ಕ್ಷಮಿಸುವುದು ನಮ್ಮ ಧರ್ಮವಲ್ಲವೆ? ಭೀಮದೇವನ ಮನ ಕರಗಿತು. ಧರ್ಮದ ಮಾತಿಗೆ ಬೆಲೆ ಕೊಟ್ಟು ಅಧರ್ಮಿಯನ್ನು ಬಿಟ್ಟುಬಿಟ್ಟ!

ಜೀವವೇನೋ ಉಳಿಯಿತು. ಆದರೆ ಪದ್ಮಿನಿ!? ಖಿಲ್ಜಿ ಚಡಪಡಿಸಿದ. ಅವನ ಅಂಗಾಂಗಗಳೆಲ್ಲ ಸೋತವು. ಪದ್ಮಿನಿಯನ್ನು ಕಾಣದೇ ಬದುಕುವುದು ದುಸ್ತರವೆಂದು ಕೂಗಾಡಿದ. ಕಾಮೋದ್ರೇಕದಿಂದ ಮತ್ತನಾದ ಒಡೆಯನನ್ನು ರಕ್ಷಿಸಲು ಅವನ ಭಂಟ ಮಲ್ಲಿಕಾಫರ್ ಸಂಚು ಹೂಡಿದ. ‘ರಾಣಿಯನ್ನು ದೂರದಿಂದಲಾದರೂ ನೋಡಲು ಅವಕಾಶ ಕೊಡಿ’ ಎಂದು ಬಿನ್ನಯಿಸಿ ಖಿಲ್ಜಿಯಿಂದ ಭೀಮದೇವನಿಗೆ ಪತ್ರ ಬರೆಸಿದ. ಭೀಮದೇವನಿಗೆ ಅದೇನು ಮಂಕು ಕವಿದಿತ್ತೋ? ಇದೊಂದು ನಿರುಪದ್ರವ ಕೋರಿಕೆ ಎಂದು ಪರಿಗಣಿಸಿದ. ಪದ್ಮಿನಿಯ ವಿರೋಧದ ನಡುವೆಯೂ ಆಗಲೆಂದು ತನ್ನ ಸಮ್ಮತಿಪತ್ರ ಕಳಿಸಿಕೊಟ್ಟ.

ರಾಣಿ ಪದ್ಮಿನಿಯ ಚೆಲುವಿಗಿಂತ ಆಕೆಯ ಬುದ್ಧಿ ಒಂದು ಗುಲಗಂಜಿ ತೂಕದಷ್ಟು ಹೆಚ್ಚು. ತಾನು ಕಳುಹಿಸುವ ರಾಖಿ ಕಟ್ಟಿಸಿಕೊಂಡು ‘ಅಣ್ಣ’ನಾದರೆ ಮಾತ್ರ ಮುಖ ತೋರುವೆನೆಂದಳು. ಆಸ್ಥಾನಕ್ಕೆ ಬಂದ ಕಾಮುಕ ಖಿಲ್ಜಿಗೆ ತನ್ನ ಮುಖವನ್ನು ಕನ್ನಡಿಯ ಬಿಂಬದಲ್ಲಿ ತೋರಿಸಿ ಮಾತು- ಮಾನಗಳನ್ನು ಉಳಿಸಿಕೊಂಡಳು!

ಅಷ್ಟಕ್ಕೇ ಖಿಲ್ಜಿಯ ಎದೆಬಡಿತ ಏರುಪೇರಾಗಿಹೋಯ್ತು. ತನ್ನ ಜನಾನಾದ ಎಲ್ಲ ಹೆಂಗಸರನ್ನು ಇವಳ ಪಾದಸೇವೆಗಿಟ್ಟರೂ ಕಡಿಮೆಯೇ ಎಂದುಕೊಂಡ. ಅವನ ಚಡಪಡಿಕೆಯ ಹೊತ್ತಿಗೆ ಅವನ ಸೇವಕರು ಕೋಟೆಯ ಉದ್ದಗಲಗಳನ್ನು ಅಳೆದುಸುರಿದಿದ್ದರು. ಮನೆಗೆ ಬಂದ ಅತಿಥಿಯನ್ನು ಬೀಳ್ಕೊಡುವ ಸಂಪ್ರದಾಯ ಪಾಲಿಸಲು ಭೀಮದೇವ ಖಿಲ್ಜಿಯ ಡೇರೆವರೆಗೂ ನಡೆದ. ಖಿಲ್ಜಿಯ ಹುಟ್ಟುಬುದ್ಧಿ ಎಲ್ಲಿಹೋಗಬೇಕು? ತನ್ನ ಭಂಟರಿಗೆ ಸನ್ನೆ ಮಾಡಿ ರಾಜನನ್ನು ಬಂಧಿಸಿಬಿಟ್ಟ! ‘ನಿನ್ನ ಬಿಡುಗಡೆಯಾಗಬೇಕು ಅಂದರೆ, ನಿನ್ನ ರಾಣಿ ನನ್ನ ತೊಡೆಯ ಮೇಲೆ ಕೂರಬೇಕು’ ಎಂದು ಷರತ್ತು ಹಾಕಿದ. ರಜಪೂತರ ರಕ್ತ ಕುದಿಯಿತು. ಪರಸ್ತ್ರೀ ತಾಯಿ ಸಮಾನ ಎನ್ನುವ ಧರ್ಮ ನಮ್ಮದು. ರಾಣಿಯಂತೂ ಸಾಕ್ಷಾತ್ ದೇವಿಯೇ ಸರಿ. ಚಿತ್ತೋಡ ಮತ್ತೊಂದು ಕದನಕ್ಕೆ ಸಜ್ಜಾಯಿತು. ಈ ಬಾರಿ ಬಲು ಎಚ್ಚರಿಕೆಯ ಕದನ ನಡೆಯಬೇಕು. ರಾಜನ ಪ್ರಾಣ ಎದುರಾಳಿಯ ಕೈಲಿದೆ. ರಾಣಿಯ ಮಾನವೂ ಉಳಿಯಬೇಕಿದೆ!

ಮುನ್ನೂರಕ್ಕೂ ಹೆಚ್ಚು ಪಲ್ಲಕ್ಕಿಗಳು ಖಿಲ್ಜಿಯ ಕಡೆ ಹೊರಟವು. “ಬರಿ ರಾಣಿಯೊಬ್ಬಳೇಕೆ? ಜನಾನಾ ಅಲಂಕರಿಸಲು ರಾಣೀವಾಸದ ಹೆಂಗಸರೆಲ್ಲ ಬರುತ್ತಿದ್ದಾರೆ” ಎಂಬ ಮಾತು ಕೇಳಿಕೇಳಿಯೇ ಖಿಲ್ಜಿ ನಿದ್ದೆ ಕಳೆದುಕೊಂಡ. ಕಾಮುಕತೆಯಿಂದ ಹಸಿದ ನಾಯಿಗಿಂತಲೂ ಕಡೆ ಅವನು!

ಇತ್ತ ಡೇರೆ ಸಮೀಪಿಸಿದ ಪಲ್ಲಕ್ಕಿಗಳಲ್ಲೊಂದು ರಾಜ ಭೀಮದೇವನನ್ನು ಮಾತನಾಡಿಸಿತು. ಹಾಗೇ ಅವನನ್ನು ಹತ್ತಿಸಿಕೊಂಡು ಪಾರುಗಾಣಿಸಿಬಿಟ್ಟಿತು!
ಅಷ್ಟೇ,
ಪಲ್ಲಕ್ಕಿಯೊಳಗಿಂದ ಸುಂದರ ಹೆಣ್ಣುಗಳು ಹರಿದಾಡುವುದನ್ನು, ರಾಣಿ ಪದ್ಮಿನಿಯ ಕಾಣ್ಕೆಯ ತುಣುಕನ್ನು ಕಾಯುತ್ತ ಕುಳಿತಿದ್ದ ಖಿಲ್ಜಿ ಬಸವಳಿದು ಬಿದ್ದ!
ಪಲ್ಲಕ್ಕಿಯಿಂದ ಶಸ್ತ್ರ ಸಜ್ಜಿತರಾದ ರಜಪೂತ ಯೋಧರು! ಕದನಿಕಲಿಗಳಂತೆ ಮೈಮೇಲರಗಿದವರ ದಾಳಿಗೆ ತತ್ತರಿಸಿಹೋಯ್ತು ಖಿಲ್ಜಿಯ ತಂಡ.
ಸುಂದರ ಮೈಕಟ್ಟಿನ ಬಾದಲ್ ಪದ್ಮಿನಿಯ ವೇಷ ಧರಿಸಿದ್ದರೆ, ಉಳಿದ ಯೋಧರು ಸಖಿಯರ ವೇಷ ತೊಟ್ಟಿದ್ದರು. ಅಂತೂ ತಮ್ಮ ರಾಜನ ಪ್ರಾಣ, ರಾಣಿಯ ಮಾನ ಕಾಪಾಡುವಲ್ಲಿ ಯಶಸ್ವಿಯಾದರು. ಖಿಲ್ಜಿ, ಕಾಫರರನ್ನು ಬಂಧಿಸಿದರು.

ಆದರೇನು? ಧರ್ಮ ಬುದ್ಧಿ ಬಿಡಬೇಕಲ್ಲ? ರಣರಂಗದಲ್ಲಲ್ಲದೆ ಇಲ್ಲಿ ಕೊಲ್ಲುವುದು ಬೇಡವೆಂದು ಖಿಲ್ಜಿಗೆ ಜೀವದಾನ ಮಾಡಿಬಂದರು.

ಇತ್ತ ಚಿತ್ತ ಸ್ವಾಸ್ಥ್ಯ ಕಳಕೊಂಡ ಖಿಲ್ಜಿ ತನ್ನೂರಿಗೆ ಪಲಾಯನ ಮಾಡಿದ. ಪದ್ಮಿನಿಯ ಮೋಹದಲ್ಲಿ ಮತ್ತನಾಗಿ ಹೋಗಿದ್ದ. ಪದ್ಮಿನಿಯನ್ನು ಪಡೆಯದೆ ರಾಜನ ಹುಚ್ಚು ಬಿಡದೆಂದು ತೀರ್ಮಾನಿಸಿದ ಮಲ್ಲಿಕಾಫರ್ ದೊಡ್ಡದೊಂದು ಸೇನೆ ಸಜ್ಜುಗೊಳಿಸಿದ. ಕೋಟೆಯ ಆಯಕಟ್ಟಿನ ಜಾಗಗಳನ್ನಂತೂ ಮೊದಲೇ ಗೊತ್ತುಮಾಡಿಕೊಂಡಿದ್ದರು. ಈಗ ಏಕಾಏಕಿ ಚಿತ್ತೋಡಿನ ಮೇಲೆ ದಾಳಿಮಾಡಿಯೇಬಿಟ್ಟ.

ಈ ಬಾರಿ ಭೀಮದೇವ ನಿಜಕ್ಕೂ ಗಲಿಬಿಲಿಗೊಳಗಾಗಿದ್ದ. ಅವನ ಸೇನೆ ಸಿದ್ಧಗೊಳ್ಳುವ ಮುನ್ನವೇ ಕಾಫರನ ಸೇನೆ ಮುಗಿಬಿತ್ತು. ಮೂರ್ನಾಲ್ಕು ದಿನಗಳೊಳಗೆ ರಜಪೂತರ ಸಂಖ್ಯೆ ಕರಗಿತು. ‘ಪ್ರಾಣ ಕೊಟ್ಟೇವು, ಶರಣಾಗೆವು’ ಎನ್ನುತ್ತಲೇ ಅವರು ರಣಾಂಗಣದಲ್ಲಿ ವೀರಮರಣ ಕಂಡರು.

ಇನ್ನು…. ಭೀಮದೇವನ ಸಾವು. ಆನಂತರ ರಾಣಿ ಪದ್ಮಿನಿ, ಖಿಲ್ಜಿಯ ತೊಡೆ ಮೇಲೆ!?
ಇದನ್ನು ನೆನೆದಾಗಲೆಲ್ಲ ರಾಣಿಯ ದೇಹ ಕಂಪಿಸುತ್ತಿತ್ತು. ಪರಪುರುಷನನ್ನು ಕಣ್ಣೆತ್ತಿಯೂ ನೋಡದ ಮಹಾತಾಯಿ, ಅವನ ಜನಾನಾದಲ್ಲಿ ಲಲ್ಲೆಗರೆಯುತ್ತಾಳೆನ್ನುವುದು ಊಹೆಗೂ ಸಾಧ್ಯವಿಲ್ಲದ ಸಂಗತಿಯಾಗಿತ್ತು.
ಅಂದು ರಾತ್ರಿ ಪದ್ಮಿನಿ ಭಿಮದೇವನ ಬಳಿಸಾರಿದಳು. ಆತ ಎಂದಿನಂತಿಲ್ಲ. ‘ನಿನ್ನ ರಕ್ಷಿಸಲಾಗಲಿಲ್ಲವಲ್ಲ’ ಎಂಬ ಭಾವದಿಂದ ಸೋತ ಕಣ್ಣುಗಳವು. ಅದನ್ನು ಗುರುತಿಸಿದ ಪದ್ಮಿನಿ, ಪತಿಯನ್ನು ಹಿಂಬದಿಯಿಂದ ಬಳಸಿದಳು. ಇದು ನನ್ನ- ನಿಮ್ಮ ಕೊನೆಯ ರಾತ್ರಿ ಎಂದಳು. ಮಾನಕ್ಕಾಗಿ ಪ್ರಾಣ ತ್ಯಾಗ ಮಾಡುವ ಬಯಕೆ ಹೇಳಿಕೊಂಡಳು. ಭೀಮದೇವನ ಎದೆ ನಡುಗಿತು.
ನಿಗಿನಿಗಿ ಉರಿಯುವ ಅಗ್ನಿಕುಂಡದೊಳಗೆ ಹಾರಿ ಆತ್ಮಾಹುತಿ ಮಾಡಿಕೊಳ್ಳುವ ‘ಜೀವಹರ’ (ಜೌಹರ್) ವಿಧಾನವೇ ಅಷ್ಟು ಭಯಂಕರ.
ಆದರೇನು? ಸೈತಾನನ ತೆವಲಿಗೆ ಮಡದಿಯನ್ನು ಒಪ್ಪಿಸುವುದಕ್ಕಿಂತ ಅಗ್ನಿದೇವನ ಮಡಿಲಿಗೆ ಹಾಕುವುದು ಒಳಿತೆನ್ನಿಸಿತವನಿಗೆ. ಅವಳ ತಲೆ ನೇವರಿಸಿ ಬಿಸಿಮುತ್ತನಿಟ್ಟು ಹೊರಟುಬಿಟ್ಟ. ಅದು, ಮುಂದಿನದಕ್ಕೆ ಅನುಮತಿ.

ಅಂತಃಪುರದೆದುರು ವಿಶಾಲವಾದ ಅಗ್ನಿಕುಂಡ ರಚನೆಯಾಯ್ತು. ಕಟ್ಟಿಗೆಗಳನ್ನು ಉರಿಸಲಾಯ್ತು. ಅತ್ತ ರಣಾಂಗಣದಲ್ಲಿ ಭೀಮದೇವನ ಪಡೆ ನೆಲಕಚ್ಚುತ್ತಿದ್ದ ಸುದ್ದಿ ಬಂದೊಡನೆ ರಾಣಿ ಪದ್ಮಿನಿ ಭಗವಂತನನ್ನು ನೆನೆಯುತ್ತ, ಪಾತಿವ್ರತ್ಯದ ಬಲ ರಕ್ಷಿಸಲಿ ಎನ್ನುತ್ತ ಅಗ್ನಿ ಕುಂಡಕ್ಕೆ ಹಾರಿದಳು.

ಬೆಂಕಿಯ ಕೆನ್ನಾಲಗೆ ಅವಳನ್ನು ಆವರಿಸಿತು. ಅಂತಃಪುರದ ಇತರ ಸ್ತ್ರೀಯರೂ ರಾಣಿಯನ್ನನುಸರಿಸಿದರು.
ಕರ್ಪೂರದ ಗೊಂಬೆ, ಕರಗಿಯೇ ಹೋಯ್ತು….
ಖಿಲ್ಜಿ ಧಾವಿಸಿ ಬಂದ. ಪದ್ಮಿನಿಯನ್ನು ಅಪ್ಪುವ ತವಕ ಅವನಲ್ಲಿ ತೀವ್ರವಾಗಿತ್ತು. ಆದರೆ ಅಲ್ಲಿ ನೋಡಿದ್ದೇನು? ರಾಣಿ ವಾಸ ಬಿಕೋ ಎನ್ನುತ್ತಿತ್ತು. ಎದೆ ಬಡಿತ ಹೆಚ್ಚಾಯಿತು. ಪದ್ಮಿನಿ ಸಿಗದಿದ್ದರೆ ತಾನು ಸತ್ತಂತೆಯೇ ಅಂದುಕೊಂಡ. ನಿಜ ಹೇಳಬೇಕೆಂದರೆ ಅವನು ಪ್ರತಿದಿನವೂ ಸತ್ತಿದ್ದ. ಪರ ಸ್ತ್ರೀಯನ್ನು ಬಯಸುವ ದೇಹ ಇದ್ದರೂ ಸತ್ತಂತೆಯೇ ಅಲ್ಲವೆ?

ರಜಪೂತ ಯೋಧನೊಬ್ಬ ಓಡೋಡಿ ಬಂದ. ಅಗ್ನಿ ಕುಂಡದ ಬೂದಿಯನ್ನು ಮುಷ್ಟಿಯಲ್ಲಿ ಹಿಡಿದು, ‘ಇದೋ, ರಾಣಿ ಪದ್ಮಿನಿ!’ ಎಂದ. ಆಕೆಯ ಭಸ್ಮ ಮುಟ್ಟುವ ಯೋಗ್ಯತೆಯೂ ನಿನಗಿಲ್ಲ, ಹೋಗು ಹೋಗೆಂದ.

ಖಿಲ್ಜಿ ಕಾಫಿರರನ್ನು ಹತ್ಯೆ ಮಾಡಲು ಬಂದಿದ್ದ. ಪವಿತ್ರವಲ್ಲದ ಭೂಮಿಯನ್ನು(!) ಅತಿಕ್ರಮಿಸಲು ಬಂದಿದ್ದ. ಆಕ್ರಮಿಸಿಯೂ ಇದ್ದ. ಕಾಫಿರರ ಹೆಂಡತಿಯರನ್ನು ಮಾತ್ರ ತನ್ನ ಜನಾನಾದೊಳಗೆ ಸೇರಿಸಿಕೊಳ್ಳಲಾಗದೆ ಸೋತು ಹೋಗಿದ್ದ.
ಅವನ ಈ ತಪ್ಪಿಗೆ ಖಂಡಿತ ಅವನಿಗೆ ಜನ್ನತ್ ನಲ್ಲಿ ಜಾಗ ಸಿಕ್ಕಿರಲಾರದು. ಎಪ್ಪತ್ತು ಹೆಂಗಸರ ಭೋಗವೂ ದಕ್ಕಿರಲಾರದು!

ಧನ್ಯೆ ಪದ್ಮಿನಿ! ನೀನು ಸತ್ತಾದರೂ ಕಾಮಾಂಧನೊಬ್ಬನಿಗೆ ನರಕದ ರುಚಿ ತೋರಿಸುವಲ್ಲಿ ಗೆದ್ದುಬಿಟ್ಟೆ!!

ಅನುಭಾವ ಬಿಂದುಗಳು…

Posted by ಅರುಂಧತಿ | Posted in | Posted on 1:14 AM

1 -

ಕಾಣದ ನಿನ್ನ
ಅರಸಿ ಅರಸಿಯೇ ಬೇಸತ್ತೆ.
ಊಹೂಂ…!
ಇಲ್ಲಿಯೂ ದಕ್ಕಲಿಲ್ಲ
ಅಲ್ಲೂ ದಕ್ಕಲಿಲ್ಲ.
ಮಾಡಿಟ್ಟ ಅಡುಗೆಯ ಬಿಟ್ಟು
ಭಿಕ್ಷಾಟನೆಗೆ
ಹೋಗಿದ್ದೇ ತಪ್ಪಾಯಿತೇನೋ?

- 2 -

ಮಾತಿಗೆ ನಿಲುಕದವನು
ಎನ್ನುತ್ತಲೇ
ಮಾತಾಡುತ್ತಾರೆ
ನಿನ್ನ ಬಗ್ಗೆ
ರೇಜಿಗೆ ಹುಟ್ಟುವುಷ್ಟು
ನಿನ್ನ ಕಂಡ ಮೇಲೆ
ಮಾತಾಡಲು
ಅವರಿಗೆ ಅದೆಲ್ಲಿ
ಪುರುಸೊತ್ತು!?

- 3 -

ಹೂವು ಚೆಂದ, ಸುಂದರ
ಅನ್ನುತ್ತಲೇ ಉಳಿದೆವು,
ದುಂಬಿ ಹೀರಿತು ಮಕರಂದ.
ನಿನ್ನ ಬಗ್ಗೆ
ಹೇಳಿದ್ದೇ ಬಂತು,
ಅವ ಸವಿದ ನಿನ್ನಂದ!

- 4 -

ಬದುಕಿಗಿಂತ ಸಾವೇ ಮೇಲು
ಅನ್ನುತ್ತಾರೆ ಕೆಲವರು.
ಬದುಕಿನ ಸವಿ ಹೀರಲಾಗದೆ,
ಸಾವಿನ ಸಾಹಸ ಮಾಡಲಾಗದೆ
ನಿತ್ಯ ಸಾಯುತ್ತಾರೆ,
ಬದುಕಿದ್ದೂ ಸತ್ತಂತಿರುತ್ತಾರೆ.

- 5 -

ಹುಟ್ಟಿದೊಡನೆ ಅಮ್ಮನ್ನ ಕಳಕೊಂಡೆ
ಅವಳು ಹಾಲೂಡಿಸಿದ್ದರೆ,
ಈ ಅಲ್ಕೋಹಾಲು ನಾನೇಕೆ ಕುಡಿಯುತ್ತಿದ್ದೆ?
ಹಾಗಂತ ಹಲುಬುತ್ತಲೇ ಇದ್ದೆ.
ನೆನ್ನೆಯಷ್ಟೇ ಸಮಾಧಾನವಾಯಿತು
ಬಾರಿನ ನನ್ನ ಟೇಬಲ್ಲ ಪಕ್ಕದಲ್ಲಿ
ಪಾರ್ಟಿ ನಡೆದಿತ್ತು
ಅಧಿಕಾರಿಗಳು, ರಾಜಕಾರಣಿಗಳು
ಜಾಮಿನ ಮೇಲೆ ಜಾಮಿಳಿಸುತ್ತಿದ್ದರು,
‘ಹಾಲೂಡಿಸಿದ ತಾಯಿ’ಗೆ ವಿಷ ಕೊಟ್ಟು!

ನನ್ನ ಬಗ್ಗೆ

Posted by ಅರುಂಧತಿ | Posted in | Posted on 4:44 AM

ಹುಟ್ಟಿದ್ದು ಹೊನ್ನಾವರ, ಓದಿದ್ದು- ಬೆಳೆದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಎಂಬ ಗ್ರಾಮದಲ್ಲಿ. ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ. ಭಟ್ಕಳದ ಅಂಜುಮನ್ ಕಾಲೇಜಿನಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವಿ.

ವಿದ್ಯಾಭ್ಯಾಸ ಪೂರೈಸಿದ ನಂತರ ಸಾಮಾಜಿಕ ಕ್ಷೇತ್ರಕ್ಕೆ ಪ್ರವೇಶ. ಸ್ವದೇಶಿ ಆಂದೋಲನಕ್ಕೆ ಸೇರ್ಪಡೆ. ಆಂದೋಲನದ ಮುಖ ಪತ್ರಿಕೆ ‘ಹೊಸ ಸ್ವಾತಂತ್ರ್ಯದ ಬೆಳಕು’ ಸಂಪಾದಕನಾಗಿ ಕಾರ್ಯ ನಿರ್ವಹಣೆ. ಇದೇ ವೇಳೆಗೆ ವಿಜಯ ಕರ್ನಾಟಕದಲ್ಲಿ ‘ಮೇರಾ ಭಾರತ್ ಮಹಾನ್’ ಕಿರು ಅಂಕಣ ಬರಹ ಪ್ರಾರಂಭ. ಮುಂದೆ ವಿಜಯ ಕರ್ನಾಟಕದಲ್ಲಿ ‘ಹೋಂಗೆ ಕಾಮ್ಯಾಬ್’ ಅಂಕಣ ಬರಹಗಾರನಾಗಿ ಮುಂದುವರಿಕೆ. ಗರ್ವ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕನ ಜವಾಬ್ದಾರಿ. ಕರ್ಮವೀರ ಪತ್ರಿಕೆಯಲ್ಲಿ ‘ಲೈಫ್ ಸ್ಕ್ಯಾನ್’ ಅಂಕಣ ಸರಣಿ.

ಸ್ವತಂತ್ರ ಕೃತಿಗಳು:

  • ಮೇರಾ ಭಾರತ್ ಮಹಾನ್
  • ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯವೀರ ಸಾವರ್ಕರ್
  • ನೆಹರೂ ಪರದೆ ಸರಿಯಿತು
  • ಪೆಪ್ಸಿ ಕೋಕ್ ಅಂತರಾಳ
  • ಸ್ವಾತಂತ್ರ್ಯ ಮಹಾ ಸಂಗ್ರಾಮ ೧೮೫೭- ಒಂದು ವಾಕ್ಚಿತ್ರ
  • ಭಾರತ ಭಕ್ತ ವಿದ್ಯಾನಂದ

ಅನುವಾದಿತ ಹಾಗೂ ಸಂಪಾದಿತ ಕೃತಿಗಳು: ಭಾರತ ಮಾತೆಯ ಕರೆ, ಸ್ವದೇಶೀ ಮತ್ತು ಗೋ ಚಿಕಿತ್ಸೆ, ಮೊದಲಾದವುಗಳು.

ಈ ಟೀವಿಯಲ್ಲಿ ‘ನಿವೇದನ’ ಕಾರ್ಯಕ್ರಮದ ನಿರೂಪಣೆ. ಇದೇ ವಾಹಿನಿಗಾಗಿ ‘ತೀರ್ಥ ಯಾತ್ರೆ’ ಕಾರ್ಯಕ್ರಮ ನಿರೂಪಣೆ. ಜೀ ಟೀವಿಯ ‘ಸಂಧ್ಯಾರಾಧನೆ’ ಕಾರ್ಯಕ್ರಮ ನಿರ್ವಹಣೆ ಮತ್ತು ನಿರೂಪಣೆ. ಉದಯ ಟೀವಿಯ ಹರಟೆ ಕಾರ್ಯಕ್ರಮ ಮತ್ತು ಕನ್ನಡ ಕಸ್ತೂರಿ ವಾಹಿನಿಯಲ್ಲಿ ಜಾಣರ ಜಗಲಿ ಕಾರ್ಯಕ್ರಮಗಳಲ್ಲಿ ನಿರಂತರ ಸಹಭಾಗಿ.

ಬೆಂಗಳೂರು ಆಕಾಶವಾಣಿಯ ಜ್ಞಾನವಾಣಿ ವಾಹಿನಿಯಲ್ಲಿ ‘ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ’ ಸರಣಿ ಉಪನ್ಯಾಸ, ಮತ್ತಿತರ ಉಪನ್ಯಾಸಗಳು.

ನಾಡು- ನುಡಿಯ ಕುರಿತಂತೆ ಉಪನ್ಯಾಸಗಳ ನೀಡಿಕೆ. ಈ ನಿಟ್ಟಿನ್ಲಲ್ಲಿ ರಾಜ್ಯಾದ್ಯಂತ ನಿರಂತರ ಪ್ರವಾಸ.

ಜಾಗೋ ಭಾರತ್ ತಂಡದ ಮೂಲಕ ವಿವಿಧೆಡೆ ದೇಶಭಕ್ತಿಗೀತೆಗಳ ಪ್ರಸ್ತುತಿ.

ರಾಷ್ಟ್ರ ಶಕ್ತಿ ಕೇಂದ್ರ ಸಂಘಟನೆಯ ಸ್ಥಾಪನೆ. ಇತರ ಸದಸ್ಯರೊಡಗೂಡಿ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರಗಳ ಆಯೋಜನೆ.